ವಿಷಯಕ್ಕೆ ಹೋಗಿ

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!



ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು.

ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು.

ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ ಸಾಯುವ ಸಂಭವ ಇದೆ. ಅದೇ ಸಮಯ ಡಿಕ್ಕಿ ಹೊಡೆದಾತನಿಗೂ ಪೆಟ್ಟಾಗುತ್ತದೆ. ಡಿಕ್ಕಿ ಹೊಡೆದ ಕಮೆಂಟೇಟರನಿಗೆ ರತ್ನಾಗರ‍್ ಅವರನ್ನು ಕೊಲ್ಲುವ ಉದ್ದೇಶವೇ ಇದ್ದಿರಬಹುದು. ಆದುದರಿಂದ ಮೊದಲೇ ಯೋಚಿಸಿ ಶಿರಸ್ತ್ರಾಣ ಹಾಕಿಕೊಂಡು ಬಂದು ಯಾಕೆ ಡಿಕ್ಕಿ ಹೊಡೆದಿರಬಾರದು ? ಆದರೆ ರತ್ನಾಗರ‍್ ಖ್ಯಾತ ವ್ಯಕ್ತಿ ಆಗಿರುವುದರಿಂದ ಅಷ್ಟು ಸುಲಭದಲ್ಲಿ ಕೊಲೆ ಮಾಡಲು ಸಾಧ್ಯವಾಗಿರಲಾರದು. ಅದೂ ಸಹ ಓಡಿ ಬಂದು ಡಿಕ್ಕಿ ಹೊಡೆದು?! ಅಥವಾ ಬೆಳಗಿನ ಜಾವ ವಾಕಿಂಗ್‌ಗೆ ಹೋದಾಗ ಈತ ಈ ಕೃತ್ಯವನ್ನು ಮಾಡಿರಬಹುದೇ ?

ಅಥವಾ ಕಮೆಂಟೇಟರ‍್ ಯಾವುದಾದರೂ ವಾಹನದಲ್ಲಿ ಡಿಕ್ಕಿ ಹೊಡೆದಿರಬಹುದೆ ? ಬೈಕ್, ಕಾರು, ಲಾರಿ ? 

ಹೀಗೆ ನಾನಾ ರೀತಿ ಯೋಚಿಸಿ ಕೊನೆಗೂ ೧೫ನೇ ಪುಟಕ್ಕೆ ಹೋಗಿ ಸುದ್ದಿಯನ್ನು ನೋಡಿದೆ. ನನಗೇ ನಗು ಬಂತು.. ಕಾರಣ ರತ್ನಾಗರ‍್ ಯಾರ ಡಿಕ್ಕಿಯಿಂದಲೂ ಸತ್ತಿರಲಿಲ್ಲ ಪಾಪ, ಅವರ ಹೆಸರೇ "ಡಿಕ್ಕಿ ರತ್ನಾಗರ‍್" ಆಗಿತ್ತು, ಹಾಗೂ ಅವರು ರೇಡಿಯೋ ಕಾಮೆಂಟೇಟರ‍್ ಸಹ ಆಗಿದ್ದರಂತೆ !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...